ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದೆ. ಈ ಸಂಬಂಧ ಸ್ಪಷ್ಟೀಕರಣ ಹೊರಡಿಸಿರುವ ಸಿಎಂ ಮಾಧ್ಯಮ ವಿಭಾಗ, ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ತಿಳಿಸಿದೆ.
ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ. ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದಿದೆ. ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಲಾಗಿದೆ. ಇಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಈ ಕುರಿತು ತನಗೆ ಮಾಹಿತಿ ಇಲ್ಲ, ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ. ಜವಾಬ್ದಾರಿ ಕೊಟ್ಟಾಗ ಬಿಟ್ಟು ಓಡಿಹೋಗೋಕಾಗುತ್ತಾ? ಎಂದು ಕೇಳಿದ್ದರು.