image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನಾಪತ್ತೆ ಪ್ರಕರಣದ ತನಿಖೆಗೆ ಆಧಾರ್‌ ಕಾರ್ಡ್‌ ಬಳಕೆ ವಿವರ ಒದಗಿಸಲು ಯುಐಡಿಎಐಗೆ ಹೈಕೋರ್ಟ್‌ ನಿರ್ದೇಶನ

ನಾಪತ್ತೆ ಪ್ರಕರಣದ ತನಿಖೆಗೆ ಆಧಾರ್‌ ಕಾರ್ಡ್‌ ಬಳಕೆ ವಿವರ ಒದಗಿಸಲು ಯುಐಡಿಎಐಗೆ ಹೈಕೋರ್ಟ್‌ ನಿರ್ದೇಶನ

ಧಾರವಾಡ: ಕಾಣೆಯಾಗಿರುವ ವ್ಯಕ್ತಿಗೆ ಸಂಬಂಧಿಸಿದ ದೂರಿನ ತನಿಖೆಗಾಗಿ ಆತ ಕೊನೆಯ ಬಾರಿ ಆಧಾರ್‌ ಕಾರ್ಡ್‌ ಬಳಕೆ ಮಾಡಿದ್ದ ಸ್ಥಳದ ವಿವರಗಳನ್ನು ಪೊಲೀಸರಿಗೆ ಒದಗಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರಕ್ಕೆ (ಯುಐಎಡಿಐ) ಹೈಕೋರ್ಟ್ ನಿರ್ದೇಶಿಸಿದೆ. ಆರು ವರ್ಷಗಳ ಹಿಂದೆ ಕಾಣೆಯಾಗಿರುವ ಮಗನನ್ನು ಪತ್ತೆ ಹಚ್ಚಲು ಆತನ ಆಧಾರ್ ಬಳಕೆಯ ವಿವರ ಒದಗಿಸಲು ಯುಐಎಡಿಐಗೆ ನಿರ್ದೇಶಿಸುವಂತೆ ಕೋರಿ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರದ ಕೃಷ್ಣಮೂರ್ತಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರ (ಧಾರವಾಡ ಪೀಠ) ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ತನಿಖೆಯ ವೇಳೆ ಪೊಲೀಸರಾಗಲಿ ಅಥವಾ ಇತರ ಯಾವುದೇ ತನಿಖಾ ಸಂಸ್ಥೆಯಾಗಲೀ ದೃಢೀಕರಣ ಸೇರಿದಂತೆ ಆಧಾರ್‌ ಅನ್ನು ಬಳಕೆ ಮಾಡಬೇಕಾಗಿ ಬಂದರೆ ಅಂತಹ ಸಂದರ್ಭಗಳಲ್ಲಿ ಆಧಾರ್‌ ಕಾಯ್ದೆ 2016ರ ಸೆಕ್ಷನ್‌ 33ರ ಅನ್ವಯ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಬೇಕು. ನ್ಯಾಯಾಲಯವು ಈ ಸಂಬಂಧ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ಆಧಾರ್‌ ಕಾಯ್ದೆಯ ಸೆಕ್ಷನ್‌ 33ರ ಅಡಿ ಯುಐಡಿಎಐಗೆ ಸೂಕ್ತ ಕಾಲಾವಕಾಶ ನೀಡಬೇಕು. ತದನಂತರ, ಆಧಾರ್‌ ಕಾರ್ಡ್‌ ಬಳಕೆಗೆ ಸಂಬಂಧಿಸಿದ ಮಾಹಿತಿ, ಅದನ್ನು ಎಲ್ಲಿ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಒದಗಿಸುವ ಕುರಿತು ನ್ಯಾಯಯುತವೂ ಮತ್ತು ಅಗತ್ಯವೂ ಆದ ಮಾಹಿತಿ ಒದಗಿಸಲು ಯುಐಡಿಎಐಗೆ ಆದೇಶ ನೀಡಬಹುದು ಎಂದು ನ್ಯಾಯಪೀಠ ಆದೇಶದಲ್ಲಿ ದಾಖಲಿಸಿದೆ. ಆಧಾರ್ ಕಾಯ್ದೆಯ ಸೆಕ್ಷನ್ 29ರ ಅಡಿ ಮಾಹಿತಿ ನೀಡಲು ನಿರ್ಬಂಧವಿದೆ. ಆದರೆ, ಆ ನಿರ್ಬಂಧ ಮೂಲ ಬಯೋಮೆಟ್ರಿಕ್ ಮಾಹಿತಿಗಷ್ಟೇ. ಯಾರಾದರೂ ನಿರ್ದಿಷ್ಟವಾಗಿ ಅರ್ಜಿ ಸಲ್ಲಿಸಿದಾಗ ಆಧಾರ್‌ ಸಂಖ್ಯೆ, ಬಯೋಮೆಟ್ರಿಕ್ ಮಾಹಿತಿ ಮತ್ತು ಡೆಮೋಗ್ರಾಫಿಕ್ ಮಾಹಿತಿಯನ್ನು ಒದಗಿಸಬೇಕಾಗುತ್ತದೆ ಮತ್ತು ಕೆಲವೊಂದು ಸಂದರ್ಭಗಳಲ್ಲಿ ತನಿಖೆಯ ಉದ್ದೇಶಕ್ಕೆ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಯುಐಡಿಎಐಗೆ ನ್ಯಾಯಾಲಯಗಳು ಸೂಕ್ತ ನಿರ್ದೇಶನ ನೀಡಬಹುದಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಅರ್ಜಿದಾರರ ಪುತ್ರನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕಾಣೆಯಾಗಿರುವ ವ್ಯಕ್ತಿಯ ಆಧಾರ್‌ ಬಳಕೆ ಬಗ್ಗೆ ದೂರು ನೀಡಿದ 15 ದಿನಗಳ ಹಿಂದಿನಿಂದ ಹಿಡಿದು ಈವರೆಗಿನ ಎಲ್ಲ ಮಾಹಿತಿಯನ್ನು 15 ದಿನಗಳಲ್ಲಿ ತನಿಖಾಧಿಕಾರಿಗೆ ಒದಗಿಸಬೇಕು. ತನಿಖಾಧಿಕಾರಿಯು ಆ ಮಾಹಿತಿಯನ್ನು ತನಿಖೆಯ ಉದ್ದೇಶಕ್ಕೆ ಹೊರತುಪಡಿಸಿ ಇತರ ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

Category
ಕರಾವಳಿ ತರಂಗಿಣಿ