ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ ಬಾಕಿ ಇರುವ ₹2000 ಹಾಗೂ ಪ್ರತಿ ಮನೆಗೆ ₹100 ಗಳಂತೆ ಅವರ ಖಾತೆಗಳಿಗೆ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಆದೇಶಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ಸಲ್ಲಿಸಲು ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿರುತ್ತದೆ. ಈ ಸಂಬಂಧ ಸದರಿ ಆಯೋಗವು ದಿನಾಂಕ:27-03-2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿರುತ್ತದೆ. ಸದರಿ ಮಧ್ಯಂತರ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಕುಟುಂಬಗಳ ಮನೆ-ಮನೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಲಾಗಿರುತ್ತದೆ.
ಗೌರವಾನ್ವಿತ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಶಿಕ್ಷಕರನ್ನು ಗಣತಿದಾರರನ್ನಾಗಿ (Enumerators) ಗುರುತಿಸಿ ನೇಮಕ ಮಾಡಲು ಉಲ್ಲೇಖ (2) ರಲ್ಲಿ ಆದೇಶಿಸಲಾಗಿರುತ್ತದೆ. ಸದರಿ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಸರ್ಕಾರದ ವತಿಯಿಂದ ನಡೆಸಲಾಗುತ್ತಿರುವ ಸಮೀಕ್ಷೆಗೆ ಅವಶ್ಯವಿರುವ ಅನುದಾನವನ್ನು ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ: ಆಇ 352 ವೆಚ್ಚ-3/ 2025 ದಿನಾಂಕ:24-04-2025 ರಂತೆ ವಿವಿಧ ಅಭಿವೃದ್ಧಿ ಯೋಜನೆಯ ಲೆಕ್ಕ ಶೀರ್ಷಿಕೆ:2225-01-796-0-02 ರಡಿ 2025-26 ನೇ ಸಾಲಿನಲ್ಲಿ ಒದಗಿಸಲಾಗಿರುವ ಒಟ್ಟು ರೂ.7075.00 ಲಕ್ಷಗಳ ಅನುದಾನದಿಂದ ಸಮೀಕ್ಷೆಗೆ ಅವಶ್ಯಕವಿರುವ ಅನುದಾನ ರೂ.9149.53 ಲಕ್ಷಗಳನ್ನು ಬಳಸಿಕೊಳ್ಳುವಂತೆ ಹಾಗೂ ಈ ಲೆಕ್ಕ ಶೀರ್ಷಿಕೆಯಡಿ ಅನುದಾನದ ಕೊರತೆ ಉಂಟಾದಲ್ಲಿ ಪೂರಕ ಅಂದಾಜಿನಲ್ಲಿ ಒದಗಿಸಲು ಕ್ರಮವಹಿಸಲಾಗುವುದೆಂದು ಉಲ್ಲೇಖ (3) ರ ಪತ್ರದಲ್ಲಿ ತಿಳಿಸಲಾಗಿರುತ್ತದೆ.