ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾದ ಬೆನ್ನಲ್ಲೇ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಮುನ್ನಲೆಗೆ ಬಂದಿದೆ. ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಹಲವು ಸ್ವಾಮೀಜಿಗಳು, ಮುಖಂಡರು ಮತ್ತೊಂದೆಡೆ, ಸಮೀಕ್ಷೆ ಸಮಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬರೆಸಲೂ ಕರೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವಸಂಸ್ಕೃತಿ ಅಧ್ಯಯನ 2025ರ ಸಮಾರೋಪದಲ್ಲಿ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್, ಈ ಹಿಂದೆ ತಮ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸಮಿತಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿತ್ತು. ಅದನ್ನು ಆಧರಿಸಿ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಸಕಾರಣ ನೀಡದೆ ಪ್ರಸ್ತಾವನೆಯನ್ನು ವಾಪಸ್ ಕಳುಹಿಸಿದೆ. ರಾಜ್ಯ ಸರ್ಕಾರ ಮತ್ತೊಮೆ ವಿವರಣೆ ಹಾಗೂ ಸ್ಪಷ್ಟನೆಗಳೊಂದಿಗೆ ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇದೇ ವೇಳೆ, 'ಕೇಂದ್ರ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ತಿರಸ್ಕರಿಸಿಲ್ಲ. ಈ ಬಗ್ಗೆ ಪುನಃ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಹೋರಾಟದ ರೂಪುರೇಷೆ ಮತ್ತೆ ಸಿದ್ಧಪಡಿಸುತ್ತೇವೆ' ಎಂದು ಲಿಂಗಾಯತ ನಾಯಕರು ಹೇಳಿದ್ದಾರೆ. ಅ.5 ರಂದು ಅರಮನೆ ಮೈದಾನದಲ್ಲಿ ಆಯೋಜಿಸಿರುವ 'ಬಸವ ಸಾಂಸ್ಕೃತಿಕ ಅಭಿಯಾನ'ದ ಸಮಾರೋಪ ಸಮಾರಂಭಕ್ಕೆ ಸಂಬಂಧಿಸಿ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಲವು ಸ್ವಾಮೀಜಿಗಳು, ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಪ್ರತಿಪಾದಿಸಿದರು. ಲಿಂಗಾಯತ ಧರ್ಮಕ್ಕೆ ಧಾರ್ಮಿಕ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ಸಿಗುವವರೆಗೂ ಹೋರಾಟ ಮುಂದುವರೆಯಬೇಕು. ಈ ಹೋರಾಟದಲ್ಲಿ ಮಿತ್ರರು ಯಾರು, ಶತ್ರುಗಳು ಯಾರು ಎಂದು ಗುರುತಿಸಲು ಸಾಧ್ಯವಾಗಬೇಕು. ಶತ್ರುಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋರಾಟ ನಡೆಸಿದರೆ, ಅದು ಯಶಸ್ವಿಯಾಗುವುದಿಲ್ಲ. ಶತ್ರುಗಳನ್ನು ಹೊರಗಿಟ್ಟು ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು.
ಸಮಾನ ಮನಸ್ಕರ ಜೊತೆಗೂಡಿ ಸೈದ್ಧಾಂತಿಕವಾಗಿ ಹೋರಾಟ ನಡೆಸಿದರೆ, ಖಂಡಿತ ಯಶಸ್ಸು ಸಿಗುತ್ತದೆ ಎಂದು ನಾಗಮೋಹನ್ದಾಸ್ ಅಭಿಪ್ರಾಯಪಟ್ಟರು. ಲಿಂಗಾಯತ ಮಠಾಧೀಶರ ಒಕ್ಕೂಟದ ಮುಖ್ಯಸ್ಥರಾಗಿರುವ ಭಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದೇವರು ಮಾತನಾಡಿ, ಸಮೀಕ್ಷೆ ಸಮಯದಲ್ಲಿ ಇತೆರೆ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು ಈಗಾಗಲೇ ನಾವು ಸಮುದಾಯಕ್ಕೆ ಕರೆ ನೀಡಿದ್ದೇವೆ. ಒಕ್ಕೂಟದಲ್ಲಿ 400ಕ್ಕೂ ಅಧಿಕ ಸ್ವಾಮೀಜಿಗಳಿದ್ದು ಒಮ್ಮತವಿದೆ. ಆದರೆ ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ತಿಳಿಸಿದರು. 2013ರಿಂದ 18ರ ನಡುವೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಡೆದಿತ್ತು. ಆದರೆ ಅದೇ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಮುಳುವಾಗಿತ್ತು. ಸಿದ್ದರಾಮಯ್ಯ ಸರ್ಕಾರ ಹಲವು ಭಾಗ್ಯ ಸರಣಿಯ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅದು ಪ್ರಯೋಜನವಾಗದೇ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುಗ್ಗರಿಸಿತ್ತು. ಇದಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟವೇ ಕಾರಣ ಎಂದು ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದರು.