ಮಂಗಳೂರು: “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ" ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈನಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ 7 ರವರೆಗೆ ನಡೆಯಲಿದೆ. ಈ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದೆ.
ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇಚ್ಚಿಸಿ ಸೂಚಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ದಕ್ಷಿಣ ಕನ್ನಡ ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಸಾರ್ವಜನಿಕರು ತಮ್ಮ ಪ್ರಕರಣಗಳು ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇದ್ದಲ್ಲಿ ಉಚ್ಚನ್ಯಾಯಾಲಯ, ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ https://dk.dcourts.gov.in/ ಅಥವಾ ದೂ. ಸಂ:- 0824 2448111 ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.