ಮಂಗಳೂರು: ಅಮೆರಿಕಾದ ಜೋಸ್ ಕೋಸ್ಟರಿಕದಲ್ಲಿ ಆಗಸ್ಟ್ 25 ರಂದು ನಡೆದ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ವಿಜೇತರಾದ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳಿಗೆ ಶನಿವಾರ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಚಾಂಪಿಯನ್ಶಿಪ್ನಲ್ಲಿ ಜೂನಿಯರ್ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ್ದ ಕಟೀಲು ಕೊಂಡೆಮೂಲ ಗ್ರಾಮದ ಕೀರ್ತನ್ ಕಟೀಲು ಅವರು 53 ಕೆಜಿ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 5 ಚಿನ್ನದ ಪದಕ ಪಡೆದು ಗೆಲುವು ಸಾಧಿಸಿದ್ದಾರೆ.
ಅದೇ ರೀತಿ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನ 105 ಕೆ.ಜಿ ವಿಭಾಗದಲ್ಲಿ ಭಾಗವಹಿಸಿದ ಮಂಗಳೂರಿನ ಸಿದ್ದಾರ್ಥ್ ಸುವರ್ಣ ಅವರು 5ನೇ ಸ್ಥಾನ ಪಡೆದಿರುತ್ತಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಈ ಕ್ರೀಡಾಪಟುಗಳನ್ನು ಹಾಗೂ ಸ್ಪರ್ಧೆಯಲ್ಲಿ ಭಾರತದ ಕೋಚ್ ಆಗಿದ್ದ ಸತೀಶ್ ಕುಮಾರ್ ಕುದ್ರೋಳಿ ಅವರನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಮಾತನಾಡಿ, ಕ್ರೀಡಾಪಟುಗಳ ಸಾಧನೆಯನ್ನು ಪ್ರಶಂಶಿಸಿ ಇವರ ಸಾಧನೆಗೆ ಸರಕಾರದಿಂದಲೂ ಸೂಕ್ತ ನೆರವು ದೊರಕಿಸಲು ಶಿಫಾರಸು ಮಾಡುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಪವರ್ ಲಿಫ್ಟಿಂಗ್ ಕ್ರೀಡೆಗೆ ಇನ್ನಷ್ಟು ಅಗತ್ಯ ಬೆಂಬಲ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.