ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ಕಾಡುತ್ತಿರುವ ಒಳಚರಂಡಿ ವ್ಯವಸ್ಥೆ (ಮನೆ, ಅಪಾರ್ಟ್ಮೆಂಟ್ಗಳ ಕೊಳಚೆ ನೀರು ಹರಿಯುವ)ಯನ್ನು ಸಮರ್ಪಕಗೊಳಿಸಲು 1200 ಕೋಟಿರೂ.ಗಳ ಪ್ಲಾನ್ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ದ.ಕ. ಜಿಲ್ಲಾಧಿಕಾರಿಯವರು ಇಂದು ಮನಪಾ ಮೇಯರ್ ಕೊಠಡಿಯಲ್ಲಿ ಫೋನ್ ಇನ್ ಮೂಲಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ವೇಳೆ ಸುದ್ದಿಗಾರರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಮಳೆ ನೀರು ಹರಿಯುವ ಚರಂಡಿಗಳಲ್ಲಿ ಅಪಾರ್ಟ್ಮೆಂಟ್, ಮನೆಗಳ ಕೊಳಚೆ ನೀರು ಹರಿಯುತ್ತಿರುವುದು, ರಾಜಕಾಲುವೆಗಳಿಗೆ ಕೊಳಚೆ ನೀರು ಸೇರುತ್ತಿರುವ ಸಮಸ್ಯೆಗಳ ಕುರಿತಂತೆ ಹಲವು ಸಾರ್ವಜನಿಕರು ಫೋನ್ ಕರೆಗಳ ಮೂಲಕ ದೂರು ನೀಡಿದರು. ಅಪಾರ್ಟ್ಮೆಂಟ್ಗಳ ನಿರ್ಮಾಣದ ಸಂದರ್ಭ ಪ್ರತ್ಯೇಕ ಎಸ್ಟಿಪಿಗಳನ್ನು ನಿರ್ವಹಿಸುವ ನಿಯಮ ಜಾರಿಯಲ್ಲಿದೆ. ಆದರೆ ಹಳೆ ಅಪಾರ್ಟ್ಮೆಂಟ್ಗಳಲ್ಲಿ ಈ ವ್ಯವಸ್ಥೆ ಇಲ್ಲ. ಹೊಸ ಅಪಾರ್ಟ್ಮೆಂಟ್ಗಳಲ್ಲಿ ಎಸ್ಟಿಪಿಗಳು ಕಾರ್ಯ ನಿರ್ವಹಿಸದೆ ಸಮಸ್ಯೆಯಾಗಿರುವುದು ಕಂಡು ಬಂದಿದೆ. ಹಾಗಾಗಿ ನಗರದ ಸಮಗ್ರ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ಮುಂದಿನ ಆರು ವರ್ಷಗಳ ಜನಸಂಖ್ಯೆಯನ್ನು ಆಧರಿಸಿ ಯುಜಿಡಿ ಪ್ಲಾನ್ ಸಿದ್ಧವಾಗಲಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿಸಚಿವರು ಸಭೆ ನಡೆಸಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜತೆಗೂ ಚರ್ಚೆಯಾಗಿದೆ. ಮುಂದಿನ ಬಜೆಟ್ನಲ್ಲಿ ಈ ಯೋಜನೆಯನ್ನು ಮಂಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.